1
1

ಬೀದರ್: 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಅಧಿಕ ಅಂಕ ಗಳಿಸಿದ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆ. 22 ರಂದು ಮಧ್ಯಾಹ್ನ 2ಕ್ಕೆ ಕಲಬುರಗಿಯ ಸೇಡಂ ರಸ್ತೆಯಲ್ಲಿನ ಹಳೆಯ ಆರ್ಟಿಒ ಕಚೇರಿ ಎದುರಿನ ಎಂ.ಆರ್.ಎಂ.ಸಿ. ಸ್ಯಾಕ್ಸ್ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ತಿಳಿಸಿದ್ದಾರೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮಾರಂಭವನ್ನು ಉದ್ಘಾಟಿಸುವರು. ಚಿತ್ತಾಪುರದ ಸೋಮಶೇಖರ ಶಿವಾಚಾರ್ಯ ಸಾನಿಧ್ಯ, ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸುವರು ಎಂದು ಹೇಳಿದ್ದಾರೆ.
ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ, ಜಿಲ್ಲಾಧಿಕಾರಿ ಇಕ್ರಂ ಷರೀಫ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಪ್ರೇರಣಾ ನುಡಿ ಆಡುವರು ಎಂದು ತಿಳಿಸಿದ್ದಾರೆ.
ಸಮಾರಂಭದಲ್ಲಿ ಬೀದರ್ ಜಿಲ್ಲೆಯ 157 ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಪುರಸ್ಕಾರವು ಪ್ರಮಾಣ ಪತ್ರ, ರೂ. 2 ಸಾವಿರ ನಗದು ಹಾಗೂ ಬ್ಯಾಗ್ ಒಳಗೊಳ್ಳಲಿದೆ ಎಂದು ಹೇಳಿದ್ದಾರೆ.
ಪುರಸ್ಕಾರಕ್ಕೆ ಅರ್ಹರಾದ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳು ಪಾಲಕರ ಅಥವಾ ತಮ್ಮ ಗುರುತಿನ ಚೀಟಿಯೊಂದಿಗೆ ಅಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30 ರ ಒಳಗೆ ಸಮಾರಂಭ ಸ್ಥಳದಲ್ಲಿ ಹಾಜರಾಗಿ, ಮುಂಚಿತವಾಗಿ ಹೆಸರು ನೋಂದಣಿ ಮಾಡಿಸಬೇಕು. ಬಳಿಕ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.
Subscribe to get the latest posts sent to your email.