ಬೀದರ, ಆಗಸ್ಟ್ 25 : ಬೀದರ ಜಿಲ್ಲೆಯಾದ್ಯಂತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ವತಿಯಿಂದ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0” ಅಭಿಯಾನವನ್ನು 2026ರ ಆಗಸ್ಟ್ 1ರಿಂದ ಡಿಸೆಂಬರ್ 30ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಎಸ್.ಬಿ.ರಹಮಾನ್ ಅವರು ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಾದ ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣ, ಮೋಟಾರು ಅಪಘಾತ ನ್ಯಾಯಾಧಿಕರಣದ ಪ್ರಕರಣ, ಚೆಕ್ ಅಮಾನ್ಯ, ಭೂ-ಸ್ವಾಧೀನ ಪ್ರಕರಣ ಸೇರಿದಂತೆ ಇತರೆ ಸಿವಿಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ, ನ್ಯಾಯಾಲಯಗಳಿಂದ ಪ್ರಕರಣಗಳನ್ನು ವರ್ಗಾಯಿಸಿಕೊಂಡು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ಸದರಿ ಪ್ರಕರಣಗಳಲ್ಲಿ ತರಬೇತಿ ಹೊಂದಿದ ನುರಿತ ಮಧ್ಯಸ್ಥಿಕೆದಾರರು ಪಕ್ಷಗಾರರ ನಡುವೆ ಮಧ್ಯಸ್ಥಿಕೆ ನಡೆಸುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಕ್ಷಿದಾರರು ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0’ ಅಭಿಯಾನದ ಲಾಭವನ್ನು ಪಡೆದುಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discover more from ಕಲಿಯುಗದ ಕೂಗು
Subscribe to get the latest posts sent to your email.