1
1

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿರುವ ಸಮಿತಿಯ ಪದಾಧಿಕಾರಿಗಳು, ಜಿಲ್ಲೆಯ ಲಕ್ಷಾಂತರ ನಿರುದ್ಯೋಗಿ ಯುವಕ-ಯುವತಿಯರ ಹಿತದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
371(ಜೆ) ಅನುಷ್ಠಾನಕ್ಕೆ ಒತ್ತಾಯ
ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ದೊರೆಯಬೇಕಾದ ವಿಶೇಷ ಅವಕಾಶಗಳು ಹಾಗೂ ಉದ್ಯೋಗ ಮೀಸಲಾತಿಯ ಪ್ರಯೋಜನವು ಅರ್ಹ ಸ್ಥಳೀಯರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಬೀದರ್ ಜಿಲ್ಲೆಯ ಹಲವು ಸರ್ಕಾರಿ ಇಲಾಖೆಗಳು ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂಬ ಆರೋಪವನ್ನು ಸಮಿತಿ ಮಾಡಿದೆ.
ಸ್ಥಳೀಯ ಅರ್ಹ ಯುವಕರು ಶಿಕ್ಷಣ ಪಡೆದು ಉದ್ಯೋಗಕ್ಕಾಗಿ ಕಾಯುತ್ತಿದ್ದರೂ, ಅವರಿಗೆ ತಮ್ಮದೇ ಜಿಲ್ಲೆಯಲ್ಲಿ ಸೂಕ್ತ ಅವಕಾಶಗಳು ದೊರೆಯುತ್ತಿಲ್ಲ. ಇದರಿಂದ ಜಿಲ್ಲೆಯ ಪದವಿ ಹಾಗೂ ತಾಂತ್ರಿಕ ಶಿಕ್ಷಣ ಪಡೆದ ಅನೇಕ ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸಮಿತಿ ತಿಳಿಸಿದೆ.
ಹೊರರಾಜ್ಯದ ಉದ್ಯೋಗಿಗಳ ಪರಿಶೀಲನೆಗೆ ಆಗ್ರಹ
ಬೀದರ್ ಗಡಿ ಜಿಲ್ಲೆಯಾಗಿರುವುದರಿಂದ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಉದ್ಯೋಗಕ್ಕಾಗಿ ಜಿಲ್ಲೆಗೆ ಬರುತ್ತಿದ್ದಾರೆ. ಸರ್ಕಾರಿ ಕಚೇರಿಗಳು, ಬ್ಯಾಂಕಿಂಗ್ ವಲಯ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿನ ಖಾಸಗಿ ಸಂಸ್ಥೆಗಳ ಪ್ರಮುಖ ಹುದ್ದೆಗಳಲ್ಲಿ ಹೊರರಾಜ್ಯದವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಸ್ಥಳೀಯ ಭಾಷೆ, ಸಂಸ್ಕೃತಿ ಹಾಗೂ ಇಲ್ಲಿನ ಜನರ ಸಮಸ್ಯೆಗಳ ಅರಿವು ಹೊಂದಿರುವ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಜಿಲ್ಲೆಯ ಸರ್ಕಾರಿ, ಅರೆ-ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರರಾಜ್ಯದ ಉದ್ಯೋಗಿಗಳ ಕುರಿತು ಸಮಗ್ರ ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ಶೇ.80ರಷ್ಟು ಉದ್ಯೋಗ ಸ್ಥಳೀಯರಿಗೆ ನೀಡಲು ಆಗ್ರಹ
ಸರೋಜಿನಿ ಮಹಿಷಿ ವರದಿ ಹಾಗೂ 371(ಜೆ)ಗೆ ಸಂಬಂಧಿಸಿದ ನಿಯಮಗಳ ಆಧಾರದ ಮೇಲೆ ಸ್ಥಳೀಯರಿಗೆ ಶೇ.80ರಷ್ಟು ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.
ಖಾಸಗಿ ಕಂಪನಿಗಳು ಸ್ಥಳೀಯ ಅರ್ಹ ಯುವಕರನ್ನು ಕಡೆಗಣಿಸಿ ಹೊರರಾಜ್ಯದವರಿಗೆ ಉದ್ಯೋಗ ನೀಡುತ್ತಿರುವುದು ಕಂಡುಬಂದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಪರವಾನಗಿ ರದ್ದುಗೊಳಿಸುವ ಕ್ರಮಕ್ಕೂ ಮುಂದಾಗಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಜಿಲ್ಲಾಡಳಿತವು ಈ ಗಂಭೀರ ಸಮಸ್ಯೆಯನ್ನು 15 ದಿನಗಳೊಳಗೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಲ್ಯಾಣ ರಾಜ್ಯ ಪ್ರಜಾಶಕ್ತಿ ಸಮಿತಿಯ ನೇತೃತ್ವದಲ್ಲಿ ಜಿಲ್ಲಾದ್ಯಂತ ಉಗ್ರ ಹಂತದ ಹೋರಾಟ ಹಾಗೂ ರಸ್ತೆ ತಡೆ ಚಳುವಳಿ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.
ಸಂಸ್ಥಾಪಕ ಅಧ್ಯಕ್ಷ ಶಾದ್ರಕ ಪಿ. ಸೀತಾಳಗೇರಾ, ಕಾರ್ಯದರ್ಶಿ ಸುನೀಲಕುಮಾರ ಜೆಸ್ಸಿ, ಪ್ರಧಾನ ಕಾರ್ಯದರ್ಶಿ ಸುಂದರರಾಜ ಭಕಾಳೆ, ಖಜಾಂಚಿ ಸುನೀಲಕುಮಾರ ಎಸ್.ಕೆ., ಸದಸ್ಯರಾದ ಲೋಕೇಶ ಕುಡ್ತೆನೋರ್ ಹಾಗೂ ಯಶೇಪ್ಪಾ ಮಾಳ್ಗೆ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Subscribe to get the latest posts sent to your email.