1
1

ಬೀದರ್: ವಿದ್ಯಾಭಾರತಿ ಜಿಲ್ಲಾ ಘಟಕ ಬೀದರ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭ ಭಾನುವಾರ ಸಂಭ್ರಮದಿAದ ಜರುಗಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತದ ಸಹಪ್ರಾಂತ ಪ್ರಚಾರಕರಾದ ಶ್ರೀನಿವಾಸ ನಾಯಕ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾಭಾರತಿ ಕಳೆದ ೭೪ ವರ್ಷಗಳಿಂದ ಮಹತ್ವದ ಸೇವೆ ಸಲ್ಲಿಸುತ್ತಿದೆ. ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತವಾಗದೆ ಮಕ್ಕಳಲ್ಲಿ ಸಂಸ್ಕಾರ, ಶಿಸ್ತು, ದೈಹಿಕ ಸಾಮರ್ಥ್ಯ, ಬೌದ್ಧಿಕ ಬೆಳವಣಿಗೆ ಹಾಗೂ ಮಾನಸಿಕ ದೃಢತೆ ಬೆಳೆಸುವ ಕಾರ್ಯವನ್ನು ವಿದ್ಯಾಭಾರತಿ ಮಾಡುತ್ತಿದೆ. ಮಕ್ಕಳಲ್ಲಿ ದೇಶಾಭಿಮಾನ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ನಂತರ ವಿವಿಧ ವಿಭಾಗಗಳಲ್ಲಿ ವಿಜೇತರಾದ ತಂಡಗಳಿಗೆ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಸಿಂಗ್ ಎನ್ಕ್ಲೇವ್ ಮಾಲೀಕರಾದ ಸರದಾರನಿ ಶ್ರೀಮತಿ ಚರಣಕೌರ ಹಾಗೂ ವಿದ್ಯಾರಣ್ಯ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ, ಇಂಜಿನಿಯರ್ ಅಭಿಷೇಕ ಭಗವತಿ ಅವರು ಪ್ರದಾನ ಮಾಡಿದರು.
ವಿದ್ಯಾಭಾರತಿ ಜಿಲ್ಲಾ ಅಧ್ಯಕ್ಷ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ ಅವರು ವಿಜೇತ ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯೊಂದಿಗೆ ಮುನ್ನಡೆಯುವಂತೆ ಸಲಹೆ ನೀಡಿದರು.
ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಭಗುಸಿಂಗ್ ಜಾಧವ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ ವಿವಿಧ ೧೨ ಜಿಲ್ಲೆಗಳಿಂದ ಬಾಲವರ್ಗ, ಕಿಶೋರವರ್ಗ ಹಾಗೂ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಒಟ್ಟು ೩೪ ತಂಡಗಳ ೩೪೦ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಕಿಶೋರವರ್ಗ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ತಂಡ ಪ್ರಥಮ ಸ್ಥಾನ ಗಳಿಸಿತು. ಉಳಿದ ವಿಭಾಗಗಳಲ್ಲಿ ಮಂಗಳೂರು ತಂಡಗಳು ವಿಜೇತರಾಗಿ ಸರ್ವಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡವು.
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಸೆಪ್ಟೆಂಬರ್ ೫ ಮತ್ತು ೬ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಕ್ಷೇತ್ರಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿವೆ.
ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದ ಆಯೋಜಕರು, ತರಬೇತುದಾರರು, ತೀರ್ಪುಗಾರರು, ಶಿಕ್ಷಕರು ಹಾಗೂ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಶಿಸ್ತುಬದ್ಧವಾಗಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟವು ಯಶಸ್ವಿಯಾಗಿ ಸಮಾರೋಪಗೊಂಡಿತು.
Subscribe to get the latest posts sent to your email.