1
1

ಬೀದರ್: ನಗರದ ವಾರ್ಡ್ ಸಂಖ್ಯೆ 34 ರ ವ್ಯಾಪ್ತಿಯ ಪಕ್ಕಲವಾಡದಲ್ಲಿ ಅರ್ಧಕ್ಕೆ ನಿಂತ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಮನೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ನಗರಸಭೆ ಮಾಜಿ ಉಪಾಧ್ಯಕ್ಷ ಫೆಲೋಮನ್ರಾಜ್ ಪ್ರಸಾದ್ ಒತ್ತಾಯಿಸಿದಾರೆ.
ಈ ಕುರಿತು ಅವರು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಕಲಬುರಗಿ ವಿಭಾಗೀಯ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
2017 ರಲ್ಲಿ ಮಂಡಳಿಯಿಂದ ಸೂರು ಇಲ್ಲದವರಿಗೆ ಮನೆ ಮಂಜೂರು ಮಾಡಲಾಗಿತ್ತು. ಒಂಬತ್ತು ವರ್ಷ ಕಳೆದರೂ ಮನೆ ನಿರ್ಮಾಣ ಪೂರ್ಣಗೊಂಡಿಲ್ಲ. ಅನೇಕ ಮನೆಗಳು ಅರ್ಧಕ್ಕೆ ನಿಂತಿವೆ. ಕೆಲ ಮನೆಗಳ ಕಾಮಗಾರಿ ಆರಂಭವೇ ಆಗಿಲ್ಲ. ಹೀಗಾಗಿ ಫಲಾನುಭವಿಗಳು ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿರುವ ಕುರಿತು ಸಚಿವರು, ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಕೂಡಲೇ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಫಲಾನುಭವಿಗಳು, ಸಾರ್ವಜನಿಕರು ಹಾಗೂ ಸಂಘಟನೆಗಳೊಂದಿಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.