1
1

ಬೀದರ್:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೈನುಗಾರರ ಸಂವಹನ ಕಾರ್ಯಕ್ರಮವನ್ನು ನಗರದ ಶಿವನಗರ ಕಚೇರಿಯಲ್ಲಿ ಟ್ರಸ್ಟಿಗಳಾದ ಉದಯ್ ಕುಮಾರ್ ಶೆಟ್ಟಿ ಮತ್ತು ಸಂಪತ್ ಸಾಮ್ರಾಜ್ಯ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಹೈನುಗಾರು ಹಾಗೂ ಹಾಲು ಸಹಕಾರಿ ಸಂಘಗಳು ಈ ಯೋಜನೆಯ ಪ್ರಯೋಜನ ಪಡೆದುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದು ಕರೆ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಯ ಹೈನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಮಂಜೂರಾಗಿದ್ದು, ಈವರೆಗೆ ಸುಮಾರು ರೂ.5 ಕೋಟಿ ಮೊತ್ತವನ್ನು ವಿವಿಧ ಕಾಮಗಾರಿಗಳಿಗೆ ಬಳಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಎಸ್. ಅನೀಲ್ ಕುಮಾರ್ ಮಾಹಿತಿ ನೀಡಿದರು.
ಸ್ಥಗಿತಗೊಂಡ ಹಾಲು ಒಕ್ಕೂಟ ಪುನರ್ರಚನೆ, ಹಾಲು ಸಂಗ್ರಹಣೆಗೆ ಕ್ಯಾನ್ ಖರೀದಿ, ಹಾಲು ಸೊಸೈಟಿಗಳಿಗೆ ಪಿ.ಟಿ. ಉಪಕರಣಗಳ ವಿತರಣೆ, ಹಾಲು ಉತ್ಪಾದಕ ಸಹಕಾರ ಸಂಘಗಳ ಕಟ್ಟಡ ನಿರ್ಮಾಣ ಹಾಗೂ ಹಾಲು ಶೇಖರಣೆಗೆ ಅಗತ್ಯ ಪರಿಕರಗಳ ಖರೀದಿ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ಬಳಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮೂಲ ಸೌಕರ್ಯ ಒದಗಿರುವುದರಿಂದ ಉತ್ಪಾದನೆ ಹೆಚ್ಚಾಗಿದೆ. ವಿಸ್ತರಣೆ ಅಧಿಕಾರಿಗಳ ಮೂಲಕ ಉತ್ಪಾದಕರ ಸಮಸ್ಯೆಗಳು ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ದಿನಕ್ಕೆ ಸುಮಾರು 1.50 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇನ್ನಷ್ಟು ಹಾಲು ಸೊಸೈಟಿಗಳು ಆರಂಭವಾಗಿ ರೈತರು ಆರ್ಥಿಕವಾಗಿ ಬಲವಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಾಲು ಸೊಸೈಟಿಗಳ ಮುಖ್ಯಸ್ಥರು, ಗ್ರಾಮದ ರೈತರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಪ್ರಾದೇಶಿಕ ನಿರ್ದೇಶಕರು, ಜಿಲ್ಲಾ ನಿರ್ದೇಶಕರು, ಕ್ಷೇತ್ರ ಯೋಜನಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.