Popular Posts

ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ:  ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಆಗಸ್ಟ್ 11 (ಕಕ ವಾರ್ತೆ): ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಲ್ಲಿ ಸಂಭವಿಸುವ ಆಕಸ್ಮಿಕ ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತನಿಖಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದು, ಈ ಕುರಿತು ರಾಜ್ಯದ ಎಲ್ಲಾ 30 ಜಿಲ್ಲೆಗಳ ಜಿಲ್ಲಾ ಕೈಗಾರಿಕಾ ಕೇಂದ್ರಗಳ (DIC) ಜಂಟಿ ನಿರ್ದೇಶಕರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಮುಖ್ಯ ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ.

ಇತ್ತೀಚೆಗೆ ಅಂದರೆ, 2026 ನೇ ಆಗಸ್ಟ್ 05 ರಂದು ಯಾದಗಿರಿ ಜಿಲ್ಲೆಯ ಕಡಚೂರು ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿತವಾಗಿರುವ  M/s CIL Labouratories Pvt Ltd ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಈ ದುರಂತದ ಹಿನ್ನೆಲೆಯಲ್ಲಿ ಜಾಗೃತಗೊಂಡಿರುವ ಇಲಾಖೆಯು, ಕೈಗಾರಿಕೆಗಳಲ್ಲಿ ನಡೆಯುವ ಆಕಸ್ಮಿಕ ಅವಘಡಗಳ ನಿರ್ವಹಣೆ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಚರಣಾ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ.

ಶಾಸನಬದ್ಧ ಇಲಾಖೆಗಳು ಹಾಗೂ ಅವುಗಳ ಜವಾಬ್ದಾರಿಗಳು :

ಕೈಗಾರಿಕಾ ಸುರಕ್ಷತೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಖಾನೆಗಳು, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಶಾಸನಬದ್ಧ ಇಲಾಖೆ/ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ : ಕೈಗಾರಿಕೆಗಳ ಸ್ಥಾಪನೆಗೂ ಮುನ್ನ ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳ ಅನುಸರಣೆಯನ್ನು ಕಡ್ಡಾಯವಾಗಿ ಖಾತರಿಪಡಿಸುವುದು.

ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ : ಲೈಸೆನ್ಸ್ ಪ್ರಕ್ರಿಯೆ, ಬಾಯ್ಲರ್ ತಪಾಸಣೆ ನಿಯಮಗಳು ಹಾಗೂ ನಿರ್ದಿಷ್ಟ ಸುರಕ್ಷತಾ ಮಾರ್ಗದರ್ಶಿ ಸೂತ್ರಗಳನ್ವಯ ಕ್ರಮವಹಿಸುವುದು.

ಕಾರ್ಮಿಕ ಇಲಾಖೆ : ಕಾರ್ಮಿಕರ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಉದ್ಯೋಗಿಕ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸುವುದು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ : ರಾಷ್ಟ್ರೀಯ ಕಟ್ಟಡ ಸಂಹಿತೆ (National Building Code – NBC) ನಿಯಮಾವಳಿಗಳನ್ನು ಅನ್ವಯಿಸಿ ನಿಯಂತ್ರಣ ಸಾಧಿಸುವುದು.

ನೇರ ದೋಷಾರೋಪಣೆಗೆ ತಡೆ : ಕೈಗಾರಿಕಾ ಘಟಕಗಳಲ್ಲಿ ದುರಂತಗಳು ನಡೆದಾಗ ನೇರವಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೇಲೆಯೇ ದೋಷಾರೋಪ ಬರುವುದು ಕಂಡುಬರುತ್ತಿದೆ. ಆದರೆ ಪ್ರತಿಯೊಂದು ಶಾಸನಬದ್ಧ ಇಲಾಖೆಗಳ ಸಮನ್ವಯದೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಈ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲಾಗುತ್ತಿದೆ.

ಮೊದಲ ತನಿಖಾ ವರದಿ (First Investigation Report) : ಜಿಲ್ಲೆಗಳಲ್ಲಿ ಕೈಗಾರಿಕಾ ಘಟಕಗಳ ಅವಘಡ ಸಂಭವಿಸಿದ ಸಂದರ್ಭಗಳಲ್ಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಕ್ಷಣವೇ ಶಾಸನಬದ್ಧ ಇಲಾಖೆಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಬೇಕು.

ಶಾಸನಬದ್ಧ ಇಲಾಖೆಗಳ ಮೂಲಕ ಮೊದಲ ತನಿಖಾ ವರದಿಗಳನ್ನು ಪಡೆದುಕೊಂಡು ಸೂಕ್ತ ಅನುಸರಣಾ ಕ್ರಮಗಳನ್ನು ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಕೈಗಾರಿಕಾಭಿವೃದ್ಧಿ ಹಾಗೂ ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಇವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading