1
1

ಬೀದರ್: ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ಬಲ ಹೆಚ್ಚಿಸಿಕೊಳ್ಳುತ್ತಿದೆ ಎಂದು ಪಕ್ಷದ ಉತ್ತರ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಅರ್ಜುನರಾವ್ ಹಲಗೆಗೌಡರು ಹೇಳಿದರು.
ನಗರದ ಚಿದ್ರಿ ರಿಂಗ್ ರಸ್ತೆಯಲ್ಲಿರುವ ನ್ಯೂ ಆದರ್ಶ ಕಾಲೊನಿಯಲ್ಲಿ ಆಮ್ ಆದ್ಮಿ ಪಕ್ಷದ ಬೀದರ್ ದಕ್ಷಿಣ ಘಟಕದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬರುವ ದಿನಗಳಲ್ಲಿ ಪಕ್ಷದ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ತಿಳಿಸಿದರು.
2028 ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವುದು ಆಮ್ ಆದ್ಮಿ ಪಕ್ಷದ ಗುರಿಯಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜಕುಮಾರ ಎನ್. ಪಾಟೀಲ ಹೇಳಿದರು.
ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವೈದ್ಯಕೀಯ ಸೇವೆ ಹಾಗೂ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಪಕ್ಷದ ಕಲಬುರಗಿ-ಬೀದರ್-ಯಾದಗಿರಿ ಉಸ್ತುವಾರಿ ದೀಪಕ್ ಮಾಲಗಾರ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಫುಲಾರಿ ಅವರು ಪಕ್ಷದ ಧ್ಯೇಯೋದ್ದೇಶಗಳ ಕುರಿತು ಮಾತನಾಡಿದರು.
ಚೊಂಡಿಯ ಜಗದೀಶ್ವರ ಮಹಾರಾಜರು ಕಚೇರಿಯನ್ನು ಉದ್ಘಾಟಿಸಿದರು. ಪಕ್ಷದ ಜಿಲ್ಲಾ ಘಟಕ, ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Subscribe to get the latest posts sent to your email.