1
1

ಬೀದರ್, ಆ. 8: ರಾಜ್ಯ ಸರ್ಕಾರದ ಸಂಪುಟ ರಚನೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಹಾಗೂ ಆದ್ಯತೆ ನೀಡಬೇಕು ಎಂದು ಶ್ರೀ ಗುರುರಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ್ ರಾವ್ ಪಾಟೀಲ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ವಾತಂತ್ರ್ಯಾನಂತರದಿಂದಲೂ ಬ್ರಾಹ್ಮಣ ಸಮುದಾಯವು ರಾಷ್ಟ್ರ ಹಾಗೂ ರಾಜ್ಯದ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದ್ದಾರೆ. ಶಿಕ್ಷಣ, ಸಾಮಾಜಿಕ ಸೇವೆ, ಸಂಸ್ಕಾರ ಮತ್ತು ಮೌಲ್ಯಗಳ ಪ್ರಸಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮುದಾಯದವರು ಸೇವೆ ಸಲ್ಲಿಸುತ್ತಿದ್ದಾರೆ. ದೇವಸ್ಥಾನಗಳು, ಪಾಠಶಾಲೆಗಳು ಹಾಗೂ ಸೇವಾ ಸಂಸ್ಥೆಗಳ ಮೂಲಕ ಬಡವರು ಮತ್ತು ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರು, ಪ್ರಾಧ್ಯಾಪಕರು ಹಾಗೂ ಸಂಶೋಧಕರಾಗಿ ಸೇವೆ ಸಲ್ಲಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮುದಾಯದವರು ಶ್ರಮಿಸುತ್ತಿದ್ದಾರೆ. ಅಲ್ಲದೆ, ಸಣ್ಣ ಉದ್ಯಮ, ವೃತ್ತಿಪರ ಸೇವೆ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಿ ಬದುಕುತ್ತಾ ಉದ್ಯೋಗ ಸೃಷ್ಟಿಗೂ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
‘ಬ್ರಾಹ್ಮಣರು ಶಾಂತಿಪ್ರಿಯರು, ಹೋರಾಟ ಮಾಡುವವರಲ್ಲ ಎಂಬ ಕಾರಣಕ್ಕೆ ಅವರನ್ನು ನಿರ್ಲಕ್ಷಿಸುವುದು ಸರಿಯಲ್ಲ. ಶಾಂತಿಯುತವಾಗಿ ಸಮಾಜ ಸೇವೆ ಮಾಡುತ್ತಿರುವ ಸಮುದಾಯಕ್ಕೂ ರಾಜಕೀಯ ವ್ಯವಸ್ಥೆಯಲ್ಲಿ ಗೌರವ ಮತ್ತು ಸೂಕ್ತ ಪ್ರಾತಿನಿಧ್ಯ ದೊರೆಯಬೇಕು’ ಎಂದು ಸುಧಾಕರ್ ರಾವ್ ಪಾಟೀಲ ಹೇಳಿದ್ದಾರೆ.
ರಾಜಕೀಯ ವ್ಯವಸ್ಥೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ತಕ್ಕ ಪ್ರಾತಿನಿಧ್ಯ ದೊರೆಯುತ್ತಿಲ್ಲ. ರಾಜ್ಯ ಸಂಪುಟದಲ್ಲಿ ಸಮುದಾಯದ ಹಿರಿಯ ಹಾಗೂ ಅನುಭವಿ ನಾಯಕರಿಗೆ ಅವಕಾಶ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಸಮಾನ ಅವಕಾಶ ಕಲ್ಪಿಸುವುದು ಹಾಗೂ ಹಲವು ವರ್ಷಗಳಿಂದ ಸಮಾಜ ಸೇವೆ ಸಲ್ಲಿಸುತ್ತಿರುವ ಸಮುದಾಯಗಳಿಗೆ ಗೌರವ ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
Subscribe to get the latest posts sent to your email.